ಇನ್ನೊಂದು ಅಕ್ಷರಂಗಳ

"ಸುಪ್ತದೀಪ್ತಿ"ಯ ಕಿಟಕಿ->->->

Wednesday 25 February, 2009

ಜಂಟಿ ಪಯಣ

ಅಂದು ನೀ ಬಂದಾಗ ಮಂದಿರದ ಹೊಸಿಲಲ್ಲಿ
ಮಂದಿ ನಿನ್ನನು ತಡೆದು ನಿಂದದ್ದು ನೆನಪಿದೆಯ?

'ಕಂದ'ನೆಂದೆನ್ನಮ್ಮ ಬಳಿಬಂದು ಕುಳಿತಾಗ
ನೀನು ಮೊಗ ತಿರುವಿದ್ದು ನಕ್ಕಿದ್ದು ನೆನಪಿದೆಯ?

ಚಂದ್ರ ಹಾಸಿದ ರಾತ್ರಿ ಮತ್ತಿನಲಿ ಈ ಧಾತ್ರಿ
ನನ್ನೊಳಗ ಕವಿಯೆದ್ದು ಹಾಡಿದ್ದು ನೆನಪಿದೆಯ?

ಹಿಂಜಿದರಳೆಯ ಕಾಳರಾತ್ರೆಯೊಳಗದ್ದಿಟ್ಟ
ಮಾಟ ಮುಂಗುರಳಲ್ಲಿ ಹೊಸೆದುಸಿರ ನೆನಪಿದೆಯ?

ಅರುಣ ಕಿರಣವ ಕದ್ದ ಹೊಂಗೆನ್ನೆ ಹಸೆಯಲ್ಲಿ
ನಿನ್ನ ದಾಸ್ಯಕೆ ಬಿದ್ದ ಕನಸುಗಳ ನೆನಪಿದೆಯ?

ಹನಿಹನಿದು ಸುಧೆಯಾಗಿ ಹರಿವ ಹೊಳೆ ಪ್ರೀತಿಯಲಿ
ಬಂಡೆ-ಸುಳಿಗಳ ಸೆಳೆತ ಕಾಡಿದ್ದು ನೆನಪಿದೆಯ?

ಪಲ್ಲವಿಸಿದೆಲ್ಲ ನಗು ಅಲೆಯಲೆಯ ಸೆಲೆಯಾಗಿ
ಮನದೊಳಗೆ ಮರುಕಳಿಸಿ ಸೇರಿದ್ದು ನೆನಪಿದೆಯ?

ಸವೆದ ಹಾದಿಯ ನಡುವೆ ಕಲ್ಲುಗಳು, ಮುಳ್ಳುಗಳು,
ಕೈಹಿಡಿದು ಜತೆಯಾಗಿ ನಡೆದದ್ದು ನೆನಪಿದೆಯ?

ಒಲುಮೆಯಂಗಳದಲ್ಲಿ ವಾತ್ಸಲ್ಯ ಮಮತೆಗಳ
ಬಳ್ಳಿ-ಗಿಡ-ಮರಗಳನು ಬೆಳೆಸಿದ್ದು ನೆನಪಿದೆಯ?

ಕಾಲನಾಲಗೆಯಲ್ಲಿ ರಸಗ್ರಂಥಿ ನಾವಾಗಿ
ಜೀವದ್ರವದೆಲ್ಲ ಸವಿ ಹೀರಿದ್ದು ನೆನಪಿದೆಯ?



ಬಟ್ಟೆ ಬದಲಿಸುವಂತೆ ಬಂಧನವ ಕಿತ್ತೊಗೆದು,
ಭಾವಗಳ ಬಿಟ್ಟೆದ್ದೆ; ಬದುಕಿದನು ನೆನೆಸಿದೆಯ?

ಇಂದು ನೀ ನಿಂದಿರುವೆ ಮಂದಿರದ ಹೊಸಿಲಲ್ಲಿ
'ಹೋಗಿ ಬರುವೆನು' ಎಂದೆ; ಚೇತನವ ಬಯಸಿದೆಯ?
(೦೩-ಡಿಸೆಂಬರ್-೨೦೦೨)