ಇನ್ನೊಂದು ಅಕ್ಷರಂಗಳ

"ಸುಪ್ತದೀಪ್ತಿ"ಯ ಕಿಟಕಿ->->->

Saturday 4 April, 2009

ಬಂದನೇನೇ...

ಓದುಗರೆಲ್ಲರಿಗೂ ಶ್ರೀರಾಮನವಮಿಯ ಶುಭಾಶಯಗಳು.


ಬಂದನೇನೇ, ರಾಮ, ಬಂದನೇನೇ
ಮುಂದೆ ನೋಡಲಾರದ ಒಂದು
ಮರುಳು ಮುದುಕಿ ಬಳಿಗೆ ಇಂದು
ಬಂದನೇನೇ, ರಾಮ, ಬಂದನೇನೇ

ನಾಡಿನ ದೊರೆ ಕಾಡೊಳು ಬಂದು
ನನ್ನ ಗುಡಿಯ ಬಾಗಿಲ ಮುಂದು
ನೂರುಕಾಲ ಜಪಿಸಿದೆನೆಂದು
ನಲ್ನುಡಿಯನಾಡಲು ಇಂದು ---ಬಂದನೇನೇ...

ಹಾದಿ ಹಲವು ನಡೆವನೆಂದು
ಹಸಿದು ದಣಿದು ಬರುವನೆಂದು
ಹುಡುಕಿ ತಡಕಿ ತನಿಹಣ್ಣೆಂದು
ಹೊಸದೆ ಕೊಯಿದು ಕಾದಿಹೆನಿಂದು ---ಬಂದನೇನೇ...

ಜನತೆಯ ಜತೆ ಆದರದಿಂದ
ಜಗದೊಡೆಯನ ಠೀವಿಯಿಂದ
ಜಗವ ಗೆಲುವ ನಸುನಗೆಯಿಂದ
ಜನರ ಮನಕೆ ಸಂತಸತಂದ ---ಬಂದನೇನೇ...

ಕೋಸಲದ ಮುದ್ದಿನ ಕಂದ
ಕೌಸಲ್ಯೆಯ ಮನದಾನಂದ
ಕೋಟಿಸೂರ್ಯ ತೇಜದಿಂದ
ಕೌಸ್ತುಭಧರ ಕರುಣೆಯಿಂದ ---ಬಂದನೇನೇ...

ಋತುರಾಜನ ಸೊಬಗಿನಿಂದ
ಋಷಿಮುನಿಗಳ ರೂಪದಿಂದ
ಋತ್ವಿಜರನು ಸೇವಿಸಿ ಬಂದ
ಋಣಮುಕ್ತಿಯ ನೀಡುವೆನೆಂದ ---ಬಂದನೇನೇ...
(೨೧-ಮೇ-೨೦೦೮)