ಇನ್ನೊಂದು ಅಕ್ಷರಂಗಳ

"ಸುಪ್ತದೀಪ್ತಿ"ಯ ಕಿಟಕಿ->->->

Sunday, 22 June 2008

ಅಮರಗಂಧ

(ಗುರುರಾಜ ಮಾರ್ಪಳ್ಳಿಯವರ ಸಂಗೀತ ನಿರ್ದೇಶನದ "ಹೇಳು ಮನಸೇ" ಧ್ವನಿಮುದ್ರಿಕೆಯಲ್ಲಿದೆ.
ಹಾಡಿದವರು: ಶ್ರೀಮತಿ ಸಂಗೀತಾ ಬಾಲಚಂದ್ರ, ಉಡುಪಿ.)


ಹವಳದ ತುದಿಯಲಿ ಅರಳುವ ಮುತ್ತು
ಹರಡುವ ಕಂಪು ಮುಸ್ಸಂಜೆಗೆ ಗೊತ್ತು
ಹಸುರಿನ ತೆರೆಯಲಿ ಮಿಂಚುವ ಮಾಯೆ
ಹೊತ್ತಾರೆ ನೋಡಲು ಬೆಳ್ಳನೆ ಛಾಯೆ

ಕಡಲಿನಾಳದ ಚಿಪ್ಪು ಒಡೆದಿಲ್ಲಿ ಬಂತೆ?
ಬರುವಾಗ ಹವಳವನು ಸೆಳೆತಂದಿತಂತೆ!
ದೇವಲೋಕದ ಗಂಧ ಚಂದನವ ಪೂಸಿ
ನಮಗಾಗಿ ಅರಳುತಿವೆ ಸೌಂದರ್ಯ ಸೂಸಿ

ಒಂದೊಂದು ತಾರೆಯೂ ಅಲ್ಲಿಂದ ಕಳಚಿ
ಇಳಿವಾಗ ಹದವಾದ ಹಾಲಂತೆ ಬಿಳಿಚಿ
ತುದಿಯಲ್ಲಿ ನೆಪಮಾತ್ರಕೊಂದು ಕಿಡಿ ಕೆಂಡ
ಮುಡಿದುಕೊಂಡರೆ ಮಾತ್ರ ಕ್ಷಣದಲ್ಲಿ ದಂಡ

ಇಂಥ ನಾಜೂಕು ಚೆಲುವ ಅಮರಾವತಿ ಹೂವು,
ಇಲ್ಲೆಲ್ಲಿ ಹುಡುಕಲಿ, ಪರದೇಶಿಗಳು ನಾವು
ಆ ಕಂಪು, ಆ ಅಂದ, ಗಂಟೆಗಳ ಆಯುಸ್ಸು
ಕಳೆದುಹೋಗಿದೆ ಈಗ; ಅಂತೆ ಬಾಲ್ಯ ವಯಸ್ಸು

ನಿನ್ನ ಮುತ್ತುಗಳನ್ನು ಆಯುತ್ತಿದ್ದ ಕೈಗಳು
ಪೋಣಿಸಿ ಮಾಲೆಮಾಡಿ ಏರಿಸಿಕೊಂಡ ಹೆರಳು
ದೇವ ಪೂಜೆಗೆ ನಿನ್ನ ತುಂಬಿಟ್ಟ ಹರಿವಾಣ
ಪಾರಿಜಾತ, ನೀನಿಲ್ಲದೂರಲ್ಲಿ ಇವೆಲ್ಲ ಭಣಭಣ
(೧೦-ಜುಲೈ-೧೯೯೮)

Sunday, 15 June 2008

ಖಾಲಿ ಗೂಡಿನ ಹಕ್ಕಿಗಳು

ಜೊತೆಗೊಂದು ಸಂಗಾತಿ ಬೇಕೆಂದು
ಸ್ವರಕ್ಕೆ ಸ್ವರ ಕೂಡಿಸಿ,
ಹಾಡಿ ನಲಿದು ನರ್ತಿಸಿ,
ಗೂಡು ಕಟ್ಟಿ, ಒಲಿಸಿ,
ಮನದೊಳಗೆ ಬಂದ ಮನದನ್ನೆ-
ಇಟ್ಟೆರಡು ಮೊಟ್ಟೆಗಳಿಗೆ ಕಾವಿರಿಸಿ,
ಮಮತೆಯ ಪಾನ ಊಡಿ, ನೋಡಿ,
ಸರದಿಯಲ್ಲಿ ಪುಟ್ಟ ಚುಂಚಗಳಿಗೆ
ಗುಟುಕಿರಿಸಿ, ನೀರುಣಿಸಿ,
ಕಾದಿಟ್ಟ ಚಿಲಿಪಿಲಿಗಳು...
ಕಣ್ಣ ಮುಂದೆ ಬೆಳೆದು, ಬಲಿತು,
ಬಣ್ಣ ರೆಕ್ಕೆ ತುಂಬಿ, ನಲಿದು,
ಬಿದ್ದು-ಎದ್ದು ಹಾರಲು ಕಲಿತು;
ಒಂದು ಮುಂಜಾನೆ...
ಚುಂಚಗಳಿಗೆ ತುತ್ತು ತಂದ ಘಳಿಗೆ
ಮರಳಿದ್ದೆವು ಖಾಲಿ ಗೂಡಿಗೆ.

ಕೂಗಿ ಕರೆದು, ಅಲೆದು ಸಾಕಾಗಿ, ಹುಡುಕಿ ಸುಸ್ತಾಗಿ,
ಎಲ್ಲೋ ಮರದೆಡೆಯಲ್ಲಿ ಮೈಮರೆತಾಗ
ಕಂಡೆವು ಮಗ ರಮಿಸಲೆತ್ನಿಸುತ್ತಿದ್ದ
ಆ ಸುಂದರಿಯನ್ನು.
ಹಾಗೇ ಮಗಳೂ ಅಲ್ಲೆಲ್ಲೋ ಬಿಂಕವಾಡಿ
ಮತ್ತಾರದೋ ಮನ ಸೆಳೆಯುವುದನ್ನು.

ಒಂದು ಗೂಡಿನ ದೀಪಗಳೆರಡು
ಮತ್ತೆರಡು ಹಣತೆಗಳ ಹಚ್ಚುವುದ ಕಂಡು
ಅದಮ್ಯ ತೃಪ್ತಿಯುಂಡು
ಜೊತೆಜೊತೆಯಾಗಿ ಹಾರಿ ಬಂದು
ಗೂಡು ಸೇರಿದೆವು.

ಖಾಲಿಯೆಂದೆನಿಸಿದ್ದ ಈ ಗುಡಿ
ತುಂಬಿ ಬಂದಂತಾಗಿ, ಉಕ್ಕಿದ ಧನ್ಯತೆಯಲಿ
ಮನಸು ಮೇಲೇರಿತ್ತು.
ಕಾಯವಳಿದ ಮಾಯೆ ದೇಹವುಳಿದು
ಛಾಯೆಯಾಗಿ ಆವಿಯಾಯಿತು.
(೧೫-ನವೆಂಬರ್-೨೦೦೧)

(ಆರೂವರೆ ವರ್ಷಗಳ ಹಿಂದೆ ಸ್ನೇಹಿತರೊಬ್ಬರ ಇಬ್ಬರು ಮಕ್ಕಳೂ ಕಾಲೇಜ್ ಅಧ್ಯಯನಕ್ಕೆಂದು ಮನೆಯಿಂದ ಹೊರಬಿದ್ದಾಗ, ಈ ದೇಶದಲ್ಲಿ ಚಾಲ್ತಿಯಲ್ಲಿರುವ ಪದಪುಂಜ- Empty Nest Symdrome- ನನ್ನ ಅರಿವಿಗೆ ಬಂತು. ಅದರ ಚಿಂತನೆಯಲ್ಲಿ ಹೊಮ್ಮಿದ ಲಹರಿ. ಈಗ, ಈ ವರ್ಷ ತಮ್ಮ ಮಕ್ಕಳ ಗ್ರಾಜುಯೇಷನ್ ಗದ್ದಲದಲ್ಲಿರುವ ನನ್ನ ಗೆಳೆಯ-ಗೆಳತಿಯರಿಗಾಗಿ...)