ಇನ್ನೊಂದು ಅಕ್ಷರಂಗಳ

"ಸುಪ್ತದೀಪ್ತಿ"ಯ ಕಿಟಕಿ->->->

Friday, 13 February 2009

ಜೋಡಿ ಗೀತೆಗಳಲ್ಲೊಂದು- ಅಕ್ಕರೆ ಹರಿದಾಗ...



ಸಂಜೀಗಿ ಮಲ್ಲೀಗಿ ಅರಳ್ಯಾವ ಬೆಳ್ಳಾಗೆ
ಈಗೆಲ್ಲಿಗ್ಹೊಂಟ್ಯೋ ನನರಾಯ- ನೋಡಲ್ಲಿ-
ಮಿಣುಕಾಡೊ ಕಣ್ಣು ನಗತಾವ

ಹೀಂಗ್ಹೀಂಗೆ ಬಂದಿದ್ದೆ, ಹಾಂಗ್ಹಾಂಗೇ ಹೊಂಟೆದ್ದೆ
ಬ್ಯಾಸರಿಕೆ ಯಾಕೋ ನನರಾಯ- ಒಂದಾರೆ-
ತೋಳ್ದಿಂಬಿಗೊರಗಿ ನೋಡೆಂದೆ

ದಿನವೆಲ್ಲ ಓಡ್ಯಾಡಿ ದಣಿವಾಗಿ ಬಂದೀಯೆ
ಒಂದೀಟು ಅಡ್ಡಾಗು ನನರಾಯ- ನಿಂಗಿಂಥ-
ಆತುರದ ಕಾರ್ಯ ಬ್ಯಾಡೇಳು

ಕಾಲಿಗೆ ನೀರ್ಕೊಡುವೆ, ಕೈಯೊಳಗೆ ಕೈಯಿಡುವೆ
ಅಕ್ಕರೆ ಮಳೆಗರೆವೆ ನನರಾಯ- ಕಣ್ಣಲ್ಲಿ-
ಕಣ್ಣಿರಿಸಿ ನಗಬಾರೊ ಪ್ರೀತೀಲೆ

ಆಸರಿಗೆ ಎಳನೀರ ಆರಿಸಿ ಅತ್ತಿಡುವೆ
ಇನಿಮಾವು ಉಣಲಿಡುವೆ ನನರಾಯ- ನೀನಿಂದು-
ತಾಂಬೂಲ ರಾಗದ ಸವಿನೋಡೊ

ಗೋಧೂಳಿ ಕೆಂಬಣ್ಣ ಕೆನ್ನೀರ ಮಾಡಿಟ್ಟು
ದಿಟ್ಟಿಯ ತೆಗೆಯುವೆ ನನರಾಯ- ಬಾ ಇಲ್ಲಿ-
ಅತ್ತಿತ್ತ ನೋಡೋ ಹಂಗ್ಯಾಕೋ

ಹಚ್ಚಾನೆ ಹಾಸಿರುವೆ ಹಚ್ಚಾಡ ನಿಂಗಾಗಿ
ಅಚ್ಚು-ಮೆಚ್ಚಿನಲೇ ನನರಾಯ- ನೀನೀಗ-
ಮೆಚ್ಚುಗೆ ಬೀರಿ ಒರಗೊಮ್ಮೆ

ಅರುಣನ ಹೊಂಬಣ್ಣ ರಂಗನ್ನೆ ಹೊದೆಸುವೆ
ತಂಗಾಳಿ ತೊಟ್ಟಿಲಲಿ ನನರಾಯ- ನಿನ್ನನ್ನು-
ಜೋಗುಳ ಹಾಡಿ ಮಲಗಿಸುವೆ

ಮೊಗ್ಗೀಗೆ ಜೀವಾದೆ ಕಣ್ಣೀನ ಹೂವಾದೆ
ಹಸಿರಿಗೆ ನೀ ಉಸಿರು ನನರಾಯ- ಬೆಳಕಾಗಿ-
ಬೇಕಾದೆ ನೀನು ಜಗಕೆಲ್ಲ

ಆ ಶಿವನ ಹಣೆಗಣ್ಣು, ಆ ಹರಿಯ ತಿರುಚಕ್ರ
ನೀನಲ್ಲವೇನೋ ನನರಾಯ- 'ದಿನಪತಿ'ಯೆ
'ಭೂಸತಿ'ಯ ಪ್ರೀತಿ ಒಪ್ಪಿಸಿಕೋ

(೦೬-ಸೆಪ್ಟೆಂಬರ್-೨೦೦೧)

Sunday, 8 February 2009

ಯಾತ್ರೆ


ನೆಲವ ಕೊರೆದು, ಮರವ ಕಡಿದು,
ಸೋಗೆ, ಬಿದಿರು ಒಟ್ಟಣೆ,
ಪರಮಯಾತ್ರೆಗಟ್ಟಣೆ.

ಮಂತ್ರ-ತಂತ್ರ, ಎಣ್ಣೆ-ನೀರು,
ಹೂವು, ಹಳದಿ, ಕುಂಕುಮ,
ದರ್ಭೆ, ಎಳ್ಳು ತತ್ಸಮ.

ಬರಿಯಕ್ಷತೆ, ಬುರುಡೆದೀಪ,
ಬಿರಿದ ಎದೆಯ ಕಂಗಳು,
ತಡವರಿಸುವ ಕೈಗಳು.

ಕಾಲವ್ಯಾಲ ದಿಗ್ವಿಜಯದಿ-
ತರ್ಕ, ಜ್ಞಾನ ನಗಣಿತ,
ಬಾಳಬಿಂಬ ಪರಿಮಿತ.

ಅಚ್ಚಳಿಯದು, ಮುಚ್ಚುಳಿಯದು,
ಬಂಧು ನಿನ್ನ ಬಂಧನ,
ಪಂಚ ಭೂತ ಚೇತನ.

(೧೩-ಜುಲೈ-೨೦೦೬)