ಇನ್ನೊಂದು ಅಕ್ಷರಂಗಳ

"ಸುಪ್ತದೀಪ್ತಿ"ಯ ಕಿಟಕಿ->->->

Saturday, 4 April 2009

ಬಂದನೇನೇ...

ಓದುಗರೆಲ್ಲರಿಗೂ ಶ್ರೀರಾಮನವಮಿಯ ಶುಭಾಶಯಗಳು.


ಬಂದನೇನೇ, ರಾಮ, ಬಂದನೇನೇ
ಮುಂದೆ ನೋಡಲಾರದ ಒಂದು
ಮರುಳು ಮುದುಕಿ ಬಳಿಗೆ ಇಂದು
ಬಂದನೇನೇ, ರಾಮ, ಬಂದನೇನೇ

ನಾಡಿನ ದೊರೆ ಕಾಡೊಳು ಬಂದು
ನನ್ನ ಗುಡಿಯ ಬಾಗಿಲ ಮುಂದು
ನೂರುಕಾಲ ಜಪಿಸಿದೆನೆಂದು
ನಲ್ನುಡಿಯನಾಡಲು ಇಂದು ---ಬಂದನೇನೇ...

ಹಾದಿ ಹಲವು ನಡೆವನೆಂದು
ಹಸಿದು ದಣಿದು ಬರುವನೆಂದು
ಹುಡುಕಿ ತಡಕಿ ತನಿಹಣ್ಣೆಂದು
ಹೊಸದೆ ಕೊಯಿದು ಕಾದಿಹೆನಿಂದು ---ಬಂದನೇನೇ...

ಜನತೆಯ ಜತೆ ಆದರದಿಂದ
ಜಗದೊಡೆಯನ ಠೀವಿಯಿಂದ
ಜಗವ ಗೆಲುವ ನಸುನಗೆಯಿಂದ
ಜನರ ಮನಕೆ ಸಂತಸತಂದ ---ಬಂದನೇನೇ...

ಕೋಸಲದ ಮುದ್ದಿನ ಕಂದ
ಕೌಸಲ್ಯೆಯ ಮನದಾನಂದ
ಕೋಟಿಸೂರ್ಯ ತೇಜದಿಂದ
ಕೌಸ್ತುಭಧರ ಕರುಣೆಯಿಂದ ---ಬಂದನೇನೇ...

ಋತುರಾಜನ ಸೊಬಗಿನಿಂದ
ಋಷಿಮುನಿಗಳ ರೂಪದಿಂದ
ಋತ್ವಿಜರನು ಸೇವಿಸಿ ಬಂದ
ಋಣಮುಕ್ತಿಯ ನೀಡುವೆನೆಂದ ---ಬಂದನೇನೇ...
(೨೧-ಮೇ-೨೦೦೮)

Monday, 30 March 2009

ಆ-ಕೃತಿ

ನಿನ್ನೆಯ ನಿನ್ನ ಬೆವರು
ಇಂದು ಹಸಿರಾದದ್ದು
ಒಬ್ಬರಿಗೇ ಗೊತ್ತು
ಹಸಿರು ಮತ್ತೆರಡು ಚಿಗುರಿ
ಮೊಗ್ಗು ಹೂವಾಗಿ ಕಾಯಾಗಿ
ಫಲಮಾಗಿ ಹಣ್ಣಾಗಿ
ಉಂಡವರ ಉಸಿರು ಹರಸಿದ್ದು
ನಿನ್ನನ್ನೇ, ನನ್ನನ್ನೇ, ಹಣ್ಣನ್ನೇ?

(೧೮-ಮಾರ್ಚ್-೨೦೦೯)