ಇನ್ನೊಂದು ಅಕ್ಷರಂಗಳ

"ಸುಪ್ತದೀಪ್ತಿ"ಯ ಕಿಟಕಿ->->->

Friday, 20 May 2011

ಸಂಜ್ಞಾ - ೦೪

ಛಿದ್ರ ಚಿತ್ರಗಳ ನೆನಪು ತುಣುಕುಗಳ ನಡುವೆಯೇ ಎದೆಯ ಮೇಲೆ ಕೈಯಿಟ್ಟುಕೊಂಡು ನೋವು ಅನುಭವಿಸಿದ. ನೋವಿನ ಮೂಲವನ್ನು ಹುಡುಕು ಎಂದೆ. ಮತ್ತೊಂದು ಜನ್ಮದ ಹಂದರಕ್ಕೆ ಹಾರಿದ....

"ಕಾಡು... ಅದರ ನಡುವೆ ಒಂದು ದೊಡ್ಡ ವಿಶಾಲವಾದ ಮನೆ. ನನ್ನದೇ ಮನೆ. ಮನೆಯಲ್ಲಿ ನಾನೇ ಹಿರಿ ಮಗ. ಇನ್ನುಳಿದ ತಮ್ಮಂದಿರು ಮೂವರು ಎಲ್ಲರಿಗೂ ಮದುವೆಯಾಗಿದೆ. ನನಗಾಗ್ಲಿಲ್ಲ. ತಮ್ಮಂದಿರಿಗೆ ಅಪ್ಪನಾಗಿದ್ದೆ. ದೊಡ್ಡ ಆಸ್ತಿ. ಗದ್ದೆ, ತೋಟ, ಕಾಡು... ಅರ್ಧ ಊರು ನಮ್ಮದೇ. ಒಳಗಿನ ಕೋಣೆಯ ಖಜಾನೆಯ ತುಂಬಾ ಚಿನ್ನ, ಅಮ್ಮ-ಅಜ್ಜಿಯರದ್ದು. ತಮ್ಮಂದಿರಿಗೆ, ಅವರ ಹೆಂಡತಿಯರಿಗೆ ಅದರ ಮೇಲೆ ಕಣ್ಣು. ಈಗಲೇ ಪಾಲು ಮಾಡ್ಲಿಕ್ಕೆ ನಾನು ತಯಾರಿಲ್ಲ. ಅಪ್ಪ ಇದ್ದಿದ್ರೆ ಮಾಡ್ತಿರಲಿಲ್ಲ ಅಂತ ನನ್ನ ಅಭಿಪ್ರಾಯ. ಅಪ್ಪನನ್ನು ಅವರ ದಾಯಾದಿಗಳು ಆಸ್ತಿ ವ್ಯಾಜ್ಯದಲ್ಲಿ ಕೊಂದಿದ್ರು... ನನಗೀಗ ಐವತ್ತಾರು ವರ್ಷ. ಮಳೆಗಾಲದ ಒಂದು ರಾತ್ರೆ... ಕತ್ತಲೆ. ನನ್ನ ಕೋಣೆಯ ದೀಪ ಆರಿದೆ. ಎಣ್ಣೆ ತರಲಿಕ್ಕೆ ಆಳಿಗೆ ಹೇಳಿ ಕಳಿಸಿ ಒಬ್ಬನೇ ಕತ್ತಲೆಯಲ್ಲಿ ಕೂತಿದ್ದೇನೆ. ಯಾರೋ ಒಳಗೆ ಬಂದಹಾಗಾಯ್ತು. ಯಾರದು? ಉತ್ತರ ಇಲ್ಲ. ಮತ್ಯಾರೋ ಆಚೆ ಓಡಿದ ಹಾಗಾಯ್ತು... ಆಳುಗಳಿರಬಹುದು... ಅಥವಾ ನನ್ನ ನಾಯಿ...

ನನ್ನ ಹಿಂದೆಯೇ ಹೆಜ್ಜೆ ಶಬ್ದ. ನನ್ನ ಸೊಂಟದ ಕಿರುಗತ್ತಿ ಹಿರಿಯುವ ಹೊತ್ತಿಗೇ ನನ್ನ ಹಿಂದಿನಿಂದ ಹೃದಯಕ್ಕೇ ಚೂರಿ ಹಾಕಿದ್ದಾನೆ... ಎರಡನೇ ತಮ್ಮ. ಅವನ ಬದಿಯಲ್ಲೇ ಅವನ ಹೆಂಡತಿ- ಅವಳು ಈಗಿನ ಸುಜೇತಾ. ಅವಳೇ ನನ್ನ ಕೊಲೆಗೆ ಕಾರಣ. ಅದಕ್ಕೇ ಅವಳನ್ನು ಎದುರಿಸಲಿಕ್ಕೆ ಆಗದಷ್ಟು ಹಿಂಜರಿಕೆ ನನಗೆ. ಅವಳು ಕೊಲೆಪಾತಕಿ. ಆಗ ಚೂರಿ ಹಾಕಿಸಿ ಕೊಂದಳು; ಈಗ ಬೆಂಕಿ ಹಚ್ಚಿಸಿ ಕೊಲ್ತಿದ್ದಾಳೆ. ಕೊಲೆಪಾತಕಿ..."

ಕಿರುಚುತ್ತಿದ್ದವನನ್ನು ಸಮಾಧಾನಪಡಿಸಿ, ಸೂಕ್ತ ಸಲಹೆಗಳನ್ನು ನೀಡಿ ಎದೆ ನೋವಿನ ನಿವಾರಣೆಗೆ ಮಾರ್ಗದರ್ಶನ ಮಾಡಿ ಅಲ್ಲಿಂದ ವಾಸ್ತವಕ್ಕೆ ಕರೆತಂದೆ. ತುಂಬಾ ಬಳಲಿ ದಣಿದು ಎದ್ದು ಬಂದ. ಆದರೂ "ಇನ್ನು ಸುಜೇತಾಳನ್ನು ಎದುರಿಸಬಲ್ಲೆ" ಅಂದ. ನಮಗಷ್ಟೇ ಬೇಕಾಗಿತ್ತು. ಶುಭ ಹಾರೈಸಿ ಬೀಳ್ಕೊಟ್ಟೆ.

ಅದಾಗಿ ನಾಲ್ಕು ತಿಂಗಳು ಸಂದಿದೆ. ಒಂದೆರಡು ಬಾರಿ ಫೋನ್ ಮಾಡಲೇ ಅನ್ನಿಸಿದರೂ ಮಾಡಿಲ್ಲ. ತೊಂದರೆಯಿದ್ದಿದ್ದರೆ ಅವನೇ ಫೋನ್ ಮಾಡಿರುತ್ತಿದ್ದ. ಇನ್ನೊಂದು ಸೆಷನ್ ಬೇಕೆನ್ನುತ್ತಿದ್ದ. ನೋ ನ್ಯೂಸ್ ಈಸ್ ಗುಡ್ ನ್ಯೂಸ್ ಅಂತ ಸುಮ್ಮನಿದ್ದೇನೆ.

(ಹೆಸರು, ಸ್ಥಳ, ಉದ್ಯೋಗ, ವಯಸ್ಸು, ವಿದ್ಯೆ, ಸಂಬಂಧಗಳು- ಎಲ್ಲವನ್ನೂ ಕಾಲ್ಪನಿಕ ನೆಲೆಯಲ್ಲಿಟ್ಟ ವಾಸ್ತವದ ಕಥೆಯಿದು.)

Wednesday, 18 May 2011

ಸಂಜ್ಞಾ - ೦೩

ಅದೇ ಬೆಂಕಿ ಸುಂದರನನ್ನು ಎಲ್ಲದರಿಂದಲೂ ವಿಮುಖವಾಗಿಸತೊಡಗಿತು. ಓದಿನಲ್ಲೂ ಗಮನವಿಲ್ಲ. ಸ್ನೇಹಿತರ ಜೊತೆಗೂ ಒಡನಾಟ ಬೇಕಿಲ್ಲ. ಮೈಯೊಳಗಿನ ಬೆಂಕಿಯನ್ನು ಆರಿಸುವುದು ಹೇಗೆಂದೇ ಅವನ ಯೋಚನೆ. ಮನೆಯಲ್ಲೇ ಇದ್ದರೆ ಅವಳತ್ತಲೇ ಗಮನ ಹರಿಯುವುದೆಂಬ ಕಾರಣಕ್ಕೆ ಕೆಲವು ದಿನ ಊರಿನ ಅಜ್ಜನ ಮನೆಗೂ ಹೊರಟ. ಅಲ್ಲಿ ತೋಟದ ಕೆರೆಯಲ್ಲಿ ಒಂದು ಇಡೀ ಬೆಳಗಿನ ಹೊತ್ತು ಕುತ್ತಿಗೆ ವರೆಗಿನ ನೀರಿನಲ್ಲಿ ಕೂತಿದ್ದು ಏನೋ ಒಂದಿಷ್ಟು ಸಮಾಧಾನ ಅನುಭವಿಸಿದ. ಹೀಗೇ ಕೆಲವು ದಿನ ಮಾಡಿದರೆ ಈ ಬೆಂಕಿ ನೀರಿನೊಳಗೆ ತಣ್ಣಗಾಗಬಹುದೆಂಬ ಭರವಸೆಯಿಂದ ಮರುದಿನವೂ ಪುನರಾವರ್ತಿಸಿದ.

ಕೆಳಗಿನ ಮೆಟ್ಟಲಲ್ಲಿ ಕೂತು ಕುತ್ತಿಗೆ ಮಟ್ಟದ ನೀರಿನ ಆಹ್ಲಾದವನ್ನು ಅನುಭವಿಸುತ್ತಿದ್ದವನ ಇಂದ್ರಿಯಗಳು ಒಮ್ಮೆಲೇ ಧಿಗ್ಗನೆದ್ದ ರೀತಿಗೆ ಬೆಚ್ಚಿ ಕಣ್ತೆರೆದಾಗ ಕಂಡದ್ದು ಎದುರಿನ ದಂಡೆಯಲ್ಲಿ ನೀರಿಗೆ ಧುಮುಕಲು ತಯಾರಾಗಿ ನಿಂತವಳು. ಇವನ ನೋಟ ತನ್ನತ್ತ ಬಿದ್ದದ್ದೇ ನೆಪವೆಂಬ ರೀತಿಯಲ್ಲಿ ಕೆರೆಗೆ ಹಾರಿ ನಾಲ್ಕೈದು ಉದ್ದುದ್ದ ಬೀಸುಹೊಡೆತಗಳಲ್ಲಿ ಈ ಬದಿಗೆ ತಲುಪಿ, ನೀರೊಳಗೆ ಮುಳುಗು ಹಾಕಿ ಸುಂದರನ ಪಾದದಿಂದ ಮುತ್ತಿಡುತ್ತಾ ಸೊಂಟದತ್ತ ಏರಿದವಳನ್ನು ಮತ್ತೆ ನೀರಿಗೇ ನೂಕುವ ಯೋಚನೆ ಬಂದರೂ ಬುದ್ಧಿ ಬರಲಿಲ್ಲ. ಕೆರೆದಂಡೆ ಮತ್ತೊಂದು ಬೆಂಕಿಯಂಗಳವಾಯ್ತು.

ಇದರ ನಂತರ ಇಂತಹ ಇನ್ನೂ ಒಂದೆರಡು ಮುಖಾಮುಖಿ. ಸುಂದರನ ಪರಿಸ್ಥಿತಿ ಗಂಭೀರವಾಯ್ತು. ಊಟ ತಿಂಡಿಯ ಪರಿವೆಯಿಲ್ಲ. ಓದಿನ ಕಡೆ ಮೊದಲೇ ಗಮನವಿಲ್ಲ. ಚಾರ್ಟರ್ಡ್ ಅಕೌಂಟೆಂಟ್ ಆಫೀಸಿಗೆ ಹೋದರೂ ಅಲ್ಲಿ ಯಾವ ಹೆಣ್ಣಿನ ಮುಖ ನೋಡಿದರೂ ಅವರಲ್ಲೆಲ್ಲ ಸುಜೇತಾಳೇ ಕಾಣತೊಡಗಿದಳು. ಯಾವ ಹೆಣ್ಣಿನ ದನಿ ಕೇಳಿದರೂ ಅವನೊಳಗೆ ಉದ್ವೇಗದ ಉರಿ ಹತ್ತಿಕೊಳ್ಳುತ್ತಿತ್ತು. ಮೊದಲ ಸಂಯೋಗದ ನಂತರ ಆರು ತಿಂಗಳು ಕಳೆದಿತ್ತು. ಯಾರೊಂದಿಗೂ ಮುಖ ನೋಡಿ ಮಾತನಾಡಲಾರದ ದುಃಸ್ಥಿತಿಗೆ ತಲುಪಿದ್ದ. ಆಗಲೇ ಹಿಪ್ನೋಥೆರಪಿಯ ಬಗ್ಗೆ ಅವನ ಸ್ನೇಹಿತನಿಂದ ತಿಳಿದುಬಂತು. ಅತ್ಯಂತ ಸಂಕೋಚದಿಂದ ಮುಜುಗರ ಪಡುತ್ತಾ ನನ್ನನ್ನು ಭೇಟಿಯಾಗಲು ಕೇಳಿಕೊಂಡ. ಕಾರಣವೇನೆಂದು ಕೇಳಿದಾಗ, "ತುಂಬಾ ಟೆನ್ಶನ್ ಆಗ್ತದೆ. ಓದ್ಲಿಕ್ಕೆ ಆಗುದಿಲ್ಲ. ಯಾವುದ್ರಲ್ಲೂ ಗಮನ ಇಲ್ಲ" ಅಂದ. ಅಪಾಯಿಂಟ್‍ಮೆಂಟ್ ಕೊಟ್ಟೆ, ಸಮಯಕ್ಕೆ ಸರಿಯಾಗಿ ಬರಲು ಸೂಚಿಸಿದೆ.

ಮೊದಲ ಭೇಟಿಯಲ್ಲಿ ಒಂದೊಂದಾಗಿ ವಿವರಗಳನ್ನು ಕೇಳುತ್ತಾ ಹೋದಂತೆ ಕಂಗಾಲಾದ ಕಳೆಗುಂದಿದ ಕಣ್ಣುಗಳ ಹಿಂದಿನ ಅತಂತ್ರ ಸ್ಥಿತಿ ಗೋಚರವಾಯ್ತು. ಒಳಉರಿಯನ್ನು ತೃಪ್ತಿಪಡಿಸಲೂ ಆಗದೆ, ಆರಿಸಲೂ ಆಗದೆ ಒದ್ದಾಡುತ್ತಿದ್ದ. ಸಮ್ಮೋಹನಕ್ಕೆ ಒಳಪಟ್ಟಾಗಲೂ ಉದ್ವೇಗ, ಆತಂಕ. ನಿರಾಳವಾಗುವ ಪರಿಯೇ ಆತನಿಗೆ ಅಸಾಧ್ಯ. ಉಸಿರಾಟದಲ್ಲಿ ತಲ್ಲೀನತೆಯಿಲ್ಲ, ಏಕಾಗ್ರತೆಯಿಲ್ಲ. ಎಲ್ಲವೂ ಏರುಪೇರು. ಏಕತಾನದ ಉಸಿರಾಟವನ್ನು ಅಭ್ಯಸಿಸಲು ತಿಳಿಸಿ ಕಳುಹಿಸಿಕೊಟ್ಟೆ.

ಎರಡನೇ ಮತ್ತು ಮೂರನೇ ಭೇಟಿಗಳಲ್ಲಿ ಆತನಿಗೆ ಪುನಃಪುನಹ ಉಸಿರಾಟದ ಏಕತಾನತೆಯನ್ನೂ ಏಕಾಗ್ರತೆಯನ್ನೂ ಅಭ್ಯಾಸ ಮಾಡಿಸಿ, ನಿರಾಳವಾಗುವುದನ್ನೇ ಹೇಳಿಕೊಡಬೇಕಾಯಿತು. ಆತನ ಮನಸ್ಸು ಸದಾ ಗೊಂದಲಭರಿತ. ತನ್ನ ಹೊರತಾಗಿ ಬೇರೆ ಯಾರಿಗೂ ಗೊತ್ತಿಲ್ಲದ ವಿಷಯ ವಿವರಗಳನ್ನೆಲ್ಲ ಹಂಚಿಕೊಳ್ಳುವಾಗಿನ ಆತಂಕ. ಚಿಕಿತ್ಸಕಿಯಾಗಿ ನನ್ನನ್ನು ಒಪ್ಪಿಕೊಳ್ಳುವಲ್ಲಿ ಸಣ್ಣ ಸಂದೇಹ. ಇವೆಲ್ಲ ಅಡೆತಡೆಗಳನ್ನು ದಾಟಿ ಮುಂದಿನ ಭೇಟಿಗೆ ಬಂದಾಗ ನಿರಾಳವಾಗಿ ಸಮ್ಮೋಹನಕ್ಕೆ ಒಳಗಾಗಿ ಯಾವುದೋ ಜನ್ಮದ ತುಣುಕನ್ನು ಎಳೆದೆಳೆದು ತಂದ.