ನನ್ನೊಲವ ಸಾಕಾರ, ನಿನಗೇಕೆ ಅಲಂಕಾರ,
ಬಂಡುಂಬ ಬಯಕೆಯಲಿ ಕಂಪಿಸಿದೆ ಅಧರ;
ರಾಗದಾಲಾಪಕ್ಕೆ ಮುಂಗುರುಳ ವೈಯಾರ,
ಕಾತರದ ಎದೆಯೊಳಗೆ ಗುಂಯ್ಗುಡುವ ಭ್ರಮರ.
ನನ್ನ ಕೈಯೊಳು ನಿನ್ನ ಕೈಯಿರಿಸಿ ಕರೆತಂದೆ,
ಈ ಮನೆಯ ಹೊಸಿಲಲ್ಲಿ ನಿಲ್ಲಿಸಿದೆ ಅಂದು;
ಅಕ್ಕಿ-ಬೆಲ್ಲವ ಚೆಲ್ಲಿ ಅಳುಕುತ್ತ ಒಳಬಂದೆ,
ಮಂಗಳದ ಸರಮಾಲೆ ನಿನ್ನೊಡನೆ ತಂದು.
ನನ್ನಮ್ಮ-ಅಪ್ಪನಿಗೆ ಪ್ರೀತಿ ತೋರಿದೆ ನೀನು,
ತಮ್ಮ-ತಂಗಿಯ ಜೊತೆಗೆ ನಿಜ ಮಮತೆಯನ್ನು;
ಬಣ್ಣಗೆಡದಿರುವಂತೆ ಬೆರೆಸಿರುವೆ ಹಾಲ್ಜೇನು,
ಮನದಂಗಳದ ತುಂಬ ಬೆಳ್ನೊರೆಯ ಜೊನ್ನು.
ನನ್ನವರು ಎಂದವಳೆ, ನೀನೆಂದು ನನ್ನವಳು,
ಪ್ರೇಮದೀವಿಗೆ ಹೊತ್ತು ಮುನ್ನಡೆಯುವವಳು;
ಕಾರ್ಗಾಲ ಮಿಂಚಲ್ಲಿ ಕಂದನನು ಕಂಡವಳು,
ಕಣ್ರೆಪ್ಪೆಯೊಳು ಬೆಳಕ ಕಾಯುತಿರುವವಳು.
ನನ್ನೊಲವೆ, ಪ್ರಿಯವಧುವೆ, ದೀಪದೊಲು ನೀ ಬೆಳಗು,
ತೈಲವಾಗುವೆ ನಾನು ಆಂತರ್ಯದೊಳಗೆ;
ಸಂದಕಾಲದ ಬಲವು ಹರಡಿರಲಿ ಕುಸುಮ ನಗು,
ನಿನ್ನ ಜೊತೆಯಿರಲೆಂದು ಮಧುಚಂದ್ರವೆಮಗೆ.
(೦೬-೦೮-೨೦೦೩)
ಇನ್ನೊಂದು ಅಕ್ಷರಂಗಳ
"ಸುಪ್ತದೀಪ್ತಿ"ಯ ಕಿಟಕಿ->->->
Thursday, 9 April 2009
Saturday, 4 April 2009
ಬಂದನೇನೇ...
ಓದುಗರೆಲ್ಲರಿಗೂ ಶ್ರೀರಾಮನವಮಿಯ ಶುಭಾಶಯಗಳು.
ಬಂದನೇನೇ, ರಾಮ, ಬಂದನೇನೇ
ಮುಂದೆ ನೋಡಲಾರದ ಒಂದು
ಮರುಳು ಮುದುಕಿ ಬಳಿಗೆ ಇಂದು
ಬಂದನೇನೇ, ರಾಮ, ಬಂದನೇನೇ
ನಾಡಿನ ದೊರೆ ಕಾಡೊಳು ಬಂದು
ನನ್ನ ಗುಡಿಯ ಬಾಗಿಲ ಮುಂದು
ನೂರುಕಾಲ ಜಪಿಸಿದೆನೆಂದು
ನಲ್ನುಡಿಯನಾಡಲು ಇಂದು ---ಬಂದನೇನೇ...
ಹಾದಿ ಹಲವು ನಡೆವನೆಂದು
ಹಸಿದು ದಣಿದು ಬರುವನೆಂದು
ಹುಡುಕಿ ತಡಕಿ ತನಿಹಣ್ಣೆಂದು
ಹೊಸದೆ ಕೊಯಿದು ಕಾದಿಹೆನಿಂದು ---ಬಂದನೇನೇ...
ಜನತೆಯ ಜತೆ ಆದರದಿಂದ
ಜಗದೊಡೆಯನ ಠೀವಿಯಿಂದ
ಜಗವ ಗೆಲುವ ನಸುನಗೆಯಿಂದ
ಜನರ ಮನಕೆ ಸಂತಸತಂದ ---ಬಂದನೇನೇ...
ಕೋಸಲದ ಮುದ್ದಿನ ಕಂದ
ಕೌಸಲ್ಯೆಯ ಮನದಾನಂದ
ಕೋಟಿಸೂರ್ಯ ತೇಜದಿಂದ
ಕೌಸ್ತುಭಧರ ಕರುಣೆಯಿಂದ ---ಬಂದನೇನೇ...
ಋತುರಾಜನ ಸೊಬಗಿನಿಂದ
ಋಷಿಮುನಿಗಳ ರೂಪದಿಂದ
ಋತ್ವಿಜರನು ಸೇವಿಸಿ ಬಂದ
ಋಣಮುಕ್ತಿಯ ನೀಡುವೆನೆಂದ ---ಬಂದನೇನೇ...
(೨೧-ಮೇ-೨೦೦೮)
Labels:
'ಭಾವಬಿಂಬ'ದಿಂದ,
ಆತ್ಮ ಚಿಂತನ...,
ಕಥನಕಾರಣ,
ಹೀಗೇ ಸಾಗಲಿ
Subscribe to:
Posts (Atom)