ಇನ್ನೊಂದು ಅಕ್ಷರಂಗಳ

"ಸುಪ್ತದೀಪ್ತಿ"ಯ ಕಿಟಕಿ->->->

Saturday, 18 July 2009

ಅಂಗಳದಿಂದ....

ಅಲ್ಲಿಂದ ಬಂದಾಗ
ಇಲ್ಲುಳಿವ ಹಂಬಲವೆ
ಬಲವಾಗಿ ಬೇರೂರಿ ಹಸಿರಾಡಿತು;
ಹಸಿನೆರಳಿನಡಿಯಲ್ಲಿ
ಉಸಿರಾಡುತಿರುವಾಗ
ಪಿಸುದನಿಯ ತೆರದಲ್ಲಿ ನೆನಪಾಡಿತು.

ಗೆಳತಿ-ಗೆಳೆಯರ ನೆನಕೆ
ಬೆಳೆದು ಹಬ್ಬಿತು ಮನಕೆ
ಕಳೆದ ಒಡನಾಟವನು ಕಣಜ ಮಾಡಿ;
ಮರೆಯ ಒಳಗೊಂದು ಹುಳು
ಕೊರೆ-ಕೊರೆದು ದಾರಿಯನು
ಸರಾಗ ಸಾಗಿತು ಯೋಚನೆಯ ಗಾಡಿ.

ಚಲನ ಶೀಲವೆ ಜೀವ-
-ಬಲವಾದ ನೆಲದಲ್ಲಿ
ಕೆಲವಾರು ಬೇರುಗಳು ಊರಲಿಲ್ಲ;
ಕವನ-ಲೇಖನ ಬರೆವ,
ಜವನ ರಂಗಕೆ ತರುವ,
ನವರಸಭರಿತರಿಗೆ ಕೊರತೆಯಿಲ್ಲ.

ಹಂಚಿಕೊಂಡಿಹ ನೆನಹು
ಅಂಚು ರಂಗಿನ ಪಟಲ,
ಚರ್ಚಿಸಿದ ಕ್ಷಣಗಳಿಗೆ ಲೆಕ್ಕವೆಲ್ಲಿ?
ಭಾಷೆ-ಬಂಧನ ನೆವನ,
ದೇಶವೊಂದರ ಸ್ಮರಣ,
ಭೂಷಣವು ಸ್ನೇಹ, ಸಹೃದಯರಲ್ಲಿ.
(೦೪-ಜುಲೈ-೨೦೦೩)
[ಹನ್ನೊಂದು ವರ್ಷಗಳ ಬಳಿಕ ಅಮೆರಿಕಾ ಬಿಟ್ಟು ಮಣಿಪಾಲಕ್ಕೆ ಹೋಗಿ ನೆಲೆಸಿದ್ದ ಸಂದರ್ಭದಲ್ಲಿ... ಎರಡು ವರ್ಷಗಳೊಳಗೇ ಮತ್ತೊಮ್ಮೆ ಅಮೆರಿಕದ ವಿಮಾನ ಹತ್ತಿದ್ದು ವಿಧಿ ಆಡಿಸಿದ ಆಟದಲ್ಲಿ]

Saturday, 11 July 2009

ಬೇಸಿಗೆಯ ಸಂಜೆ

ಬೇಸಿಗೆ ರಜೆಯಲಿ ಬಾಡಿಗೆ ಸೈಕಲು
ಜೊತೆಯಲಿ ನಡೆದರು ಬೀದಿಯ ಮಕ್ಕಳು
ಊರಿನ ತೋಪಲಿ ಹೊಸದೇ ಆಟ
ಅರಿಯದ ಕಿರಿಯಗೆ ಹಿರಿಯನ ಪಾಠ

ಕತ್ತರಿ ಕಾಲು ಹಾಕುತ ಏರು
ಪೆಡಲ್ ತುಳಿದು ಹಿಡಿ ಹ್ಯಾಂಡಲ್ ಬಾರು
ಹಾದಿಯ ಮೇಲೆ ಇರಬೇಕು ಗಮನ
ಕಲಿಕೆಯೇನಲ್ಲ ರಾಕೆಟ್ ವಿಜ್ಞಾನ

ನೀನೂ ಬಾರೇ, ಮುಂದಿನ ಸುತ್ತಿಗೆ
ನಾವಿದ್ದೇವೆ ಭಯಬೇಡ, ಹತ್ತು ಮೆಲ್ಲಗೆ
ಎಲ್ಲರಿಗೂ ಇದೆ ಸಮಯಾವಕಾಶ
ಕಲಿಕೆಗೆ ಕೊಡುವನು ಸೈಕಲಂಗಡಿ ಪಾಷ
(ಚಿತ್ರಕವನ- ಚಿತ್ರ-೧೦೯ - ಮರದ ಕೆಳಗೆ ಮೂವರು ಹುಡುಗರು, ಒಬ್ಬಳು ಹುಡುಗಿ, ದೊಡ್ಡ ಹುಡುಗನ ಕೈಯಲ್ಲಿ ಸೈಕಲ್)
(೦೫-ಜುಲೈ-೨೦೦೯)