ಇನ್ನೊಂದು ಅಕ್ಷರಂಗಳ

"ಸುಪ್ತದೀಪ್ತಿ"ಯ ಕಿಟಕಿ->->->

Tuesday, 16 March 2010

ಲಭ್ಯ

ಹೇಳಬೇಕೆಂದುಕೊಂಡದ್ದು ಒಂದು
ಬಿಸಿಯುಸಿರಿನ ಒತ್ತಡಕ್ಕೆ ಪಕ್ಕಾಗಿ
ಮುತ್ತು ಮುತ್ತಾಗಿ ಚಿಮ್ಮಿ ಉದುರಿ
ತೋಟದೆಡೆಯಲ್ಲಿ ಬಿತ್ತಿದ್ದು ಮೊಳಕೆಯೊಡೆದು
ಅಕ್ಷರಕ್ಷರ ಪದಪದ ಸಾಲುಗಳೆಲ್ಲ
ಒಂದಕ್ಕೊಂದು ಬೆಸೆದು ಗೋಜಲು ಗೋಜಲು
ಬಿಸಿಲಿಗೆ ಹಚ್ಚನೆ ಹರಡಿ ಬೆಳೆದು
ಹಿತ್ತಿಲ ತುಂಬೆಲ್ಲ ಕಣ್ಣಿಗೆ ತಂಪು
ಕಾಲ್ತೊಡಕುವ ಕುಂಬಳ ಬಳ್ಳಿ
ದಟ್ಟ ಬಣ್ಣ ನಳನಳಿಸುವ ದೊರಗು
ಎಲೆಗಳ ನಡುವೆ ಹೂವಾಗಿದ್ದೂ ಕಾಣದೆ
ಕಿರುಕಾಯಾಗಿ ಎಳಸು ಮಾಗಿ
ಪಕ್ವವಾದಾಗ ಹಸುರಿನ ಮರೆಯಲ್ಲಿ
ಬೂದುಬಿಳುಪೋ ಚೆಂದಗೆಂಪೋ, ಅಂತೂ
ಬಳ್ಳಿಗೆ ನಿಸ್ವಾರ್ಥ ಸಫಲ ಧರ್ಮ
ಮಾಲಿಗೆ ಅಧಿಕಾರವಿಲ್ಲದ ಕರ್ಮ

(೨೪-ಜೂನ್-೨೦೦೯)

(09-08-09ರಂದು ಕನ್ನಡ ಪ್ರಭ ಸಾಪ್ತಾಹಿಕದಲ್ಲಿ ಪ್ರಕಟಿತ. ಸಂಪಾದಕರಿಗೆ ವಂದನೆಗಳೊಂದಿಗೆ ಧನ್ಯವಾದಗಳು. ಡಾ. ವಸಂತಕುಮಾರ್ ಪೆರ್ಲ ಅವರು ಸಂಪಾದಿಸುತ್ತಿರುವ "ಕಾವ್ಯ ೨೦೦೯"ರಲ್ಲಿಯೂ ಸೇರ್ಪಡೆಯಾಗುತ್ತಿದೆ; ಅವರಿಗೂ ಸಸ್ನೇಹ ನಮನಗಳು.)

Monday, 8 March 2010

ಸ್ವರಾಭಾರ

ಎಂಟು ಕಣ್ಣಿನ ಬಿದಿರುಗೋಲಿಗೆ
ಎಂಟು ದಿಕ್ಕಿನ ಉಸಿರ ಶಕ್ತಿ
ಒಂದೆ ಉಸಿರಿಗೆ ಭಿನ್ನ ಹೆಸರನು
ಒಂದೆ ಹೊರಳಲಿ ಕೊಡುವ ಶಕ್ತಿ

ಪೂರ್ಣ ತುಂಬಿದ ಮಣ್ಣ ಕುಡಿಕೆಗೆ
ಚಿಣ್ಣಕೋಲದು ಕುಣಿದು ಶಕ್ತಿ
ಅರ್ಧಮರ್ಧದ ವಿವಿಧ ಸೊಗಸಲಿ
ಪೂರ್ಣ ರೂಪದ ಅಲೆಯ ಶಕ್ತಿ

ನಾಕು ತಂತಿಯ ನಾಲ್ಕು ನೆಲೆಯಲಿ
ನಾಕ ತೋರುವ ಲೋಕ ಶಕ್ತಿ
ಹರಿದು ಹಾಯುತ ಮೀಟಿ ಆಯುತ
ಹರಿಸಿ ಸುರಿಸುವ ಮೋದ ಶಕ್ತಿ

ಏಳು ಸ್ವರಗಳು ಏಳು ನೆಲೆಗಳು
ಏಳು ಎಳೆಗಳ ಕೇಳು ಶಕ್ತಿ
ಮೂರು ಸ್ತರದಲಿ ಮೈಯ ಮರೆಯಲು
ಮೇಲು ಇಲ್ಲದ ಮೇಳ ಶಕ್ತಿ

(೧೭-ಎಪ್ರಿಲ್-೨೦೦೯)