ಇನ್ನೊಂದು ಅಕ್ಷರಂಗಳ

"ಸುಪ್ತದೀಪ್ತಿ"ಯ ಕಿಟಕಿ->->->

Monday, 29 November 2010

ಸುಮ್ಮನೆ ನೋಡಿದಾಗ...೦೫

ಮರುದಿನ ಹೊಸ ಕಥೆಯನ್ನು ನೇಹಾಳ ಕೈಗೆ ರವಾನಿಸಿದೆ. ಮಧ್ಯಾಹ್ನದ ಊಟ ಮುಗಿಸಿ ಮೈದಾನದ ಮರದಡಿಗೆ ಸಾಗಿದೆವು. ಹೊಸ ಕಥೆಯ ಓದುವಿಕೆಯಲ್ಲಿ ಅಲ್ಲಿನ ಅಳಿಲು ಮತ್ತು ಗುಬ್ಬಚ್ಚಿಗಳೂ ಭಾಗಿಯಾದವು. ಎಲ್ಲೋ ಕಳೆದುಹೋಗಿದ್ದ ಎರಡು ಮನಸ್ಸುಗಳನ್ನು ಅಳಿಲು ಕಿಚಕಿಚ ಕಿರುಚಾಡಿ ಎಚ್ಚರಿಸಿತು. ಮೈದಾನದಲ್ಲಿ ಕ್ರಿಕೆಟ್ ಆಡಲು ಹುಡುಗರ ಗುಂಪು ಬರುತ್ತಿತ್ತು. ಕ್ಲಾಸುಗಳೆಲ್ಲ ಮುಗಿದೇಹೋಗಿದ್ದವು. ಸಂಜೆ ಐದಾಗಿತ್ತು. ಮೊತ್ತ ಮೊದಲ ಬಾರಿಗೆ ನಾವಿಬ್ಬರೂ ತರಗತಿಗಳಿಗೆ ಚಕ್ಕರ್ ಹಾಕಿದ್ದೆವು.

ನೇಹಾ ಕಿಚಾಯಿಸಿದಳು: ‘ನೋಡಿದ್ಯಾ ರೊಮ್ಯಾಂಟಿಕ್ ಲಹರಿ ಹೇಗಿರ್ತದೇಂತ? ಈವರೆಗೂ ಕ್ಲಾಸ್ ತಪ್ಪಿಸದ ನಾವಿಬ್ರೂ ಅದ್ರ ಹೊನಲಲ್ಲಿ ಮುಳುಗಿಹೋಗಿದ್ದೆವು ಅಂದ್ರೆ ಇನ್ನು ಅದೇ ಗುಂಗಿನಲ್ಲಿ ಹಾರಾಡುವವರ ಗತಿಯೇನು? ಗೊತ್ತಾಯ್ತಾ? ಅದ್ಕೇ ಹೇಳಿದ್ದು ರೊಮ್ಯಾಂಟಿಕ್ ಬರೀ ಅಂತ...’ ಸುಮ್ಮನೇ ಕೋಲೇಬಸವನ ಹಾಗೆ ತಲೆಹಾಕಿ ಹೆಜ್ಜೆ ಹಾಕಿದೆ. ನಿಜವಾಗಿಯೂ ನನ್ನ ಒಂದು ಭಾಗವನ್ನು ನಾನು ಕಥೆಯೊಳಗೆ ಕಳೆದುಕೊಂಡಿದ್ದೆ. ಇದನ್ನು ಬರೆದವಳು ನಾನೇನಾ? ನಂಬಿಕೆಯಿರಲೇ ಇಲ್ಲ.

ಯಾವುದೋ ಭ್ರಮಾಲೋಕದಲ್ಲಿ ತೇಲುತ್ತಾ ಮನೆಹೊಕ್ಕಿದವಳಿಗೆ ಮಾಮೂಲು ಸ್ವಾಗತ ಕಾದಿತ್ತು.
‘ಯಾಕಿಷ್ಟು ತಡ? ಎಲ್ಲಿ ಅಲೆದಾಡ್ತಿದ್ದಿ ಇಷ್ಟೊತ್ತು ಬೀದಿ ಬಸವಿ ಥರಾ? ನಿಂಗೇನು ಹೇಳುವವ್ರು ಕೇಳುವವ್ರು ಯಾರೂ ಇಲ್ವಾ? ಮರ್ಯಾದೆಯಿಂದ ಕಾಲೇಜ್ ಬಿಟ್ಟ ಕೂಡ್ಲೇ ಮನೆಗೆ ಬರಬಾರ್ದಾ? ರಸ್ತೆ ಗಸ್ತು ಹೊಡೀಲಿಕ್ಕೆ ಯಾರ್ ಹೇಳಿದ್ರು?...’
ಮುಂದುವರೀತಾ ಇತ್ತು ನಿರರ್ಗಳ ‘ಬೌಗುಳ’. ಅಮ್ಮನಿಗೆ ಹೀಗೆಲ್ಲ ಹೇಳಬಾರದು ಅನ್ನುವ ವಿವೇಚನೆ ಇದ್ದರೂ ಕೆಲವಾರು ವರ್ಷಗಳಿಂದ ಅವರ ಅವ್ಯಾಹತ ಬೌಬೌಬೈಗಳನ್ನು ಕೇಳೀಕೇಳೀ ರೋಸಿಹೋಗಿತ್ತು ಮನಸ್ಸು. ಅದ್ಕೇ ನನ್ನೊಳಗಿನ ಸ್ವತಂತ್ರ ಸ್ವಂತಿಕೆ ಕಥೆಯೊಳಗೆ ಬಿಚ್ಚಿಕೊಂಡಿತ್ತೆನ್ನುವುದು ಹೊಳೆಯಿತು. ‘ಅದಕ್ಕಾಗಿಯಾದರೂ ಅಮ್ಮನಿಗೆ ಥ್ಯಾಂಕ್ಸ್ ಹೇಳ್ಬೇಕು ನೀನು’ ಅಂತ ನೇಹಾ ಹೇಳಬಹುದು ಎನ್ನುವ ಊಹೆಯಿಂದ ನಗುವೇ ಬಂತು. ಬಚ್ಚಲುಮನೆಯಲ್ಲಿ ಕೈಕಾಲು ತೊಳೆಯುತ್ತಿದ್ದ ಕಾರಣ ನನ್ನ ನಗು ಅಮ್ಮನಿಗೆ ಕಾಣಲಿಲ್ಲ. ಇನ್ನೊಂದು ಅವಾಂತರಕ್ಕೆ ಅವಕಾಶವಾಗಲಿಲ್ಲ.

ರಾತ್ರೆಯೆಲ್ಲ ಮತ್ತೆ ಅದೇ ಕನಸು. ಕಥಾನಾಯಕಿಯೇ ನಾನಾದಂತೆ... ಹರ್ಷಣ್ಣ ನನಗಾಗಿ ಗುಲಾಬಿ ರಂಗಿನ ಚಿತ್ತಾರವುಳ್ಳ ಬಿಳೀ ಸಲ್ವಾರ್ ಬಾಂಬೇಯಿಂದ ತಂದಂತೆ... ಅದನ್ನು ಧರಿಸಿ ನಾನು ಮೋಡಗಳಲ್ಲಿ ತೇಲುತ್ತಾ ಸುಂದರ ರಾಜಕುಮಾರನೊಬ್ಬನನ್ನು ಭೇಟಿಯಾದಂತೆ... ಅರೇ... ಅವನು ನನ್ನ ಕ್ಲಾಸ್‍ಮೇಟ್ ಶರತ್‍ನ ಕಸಿನ್ ಅಲ್ವಾ? ಶಿವಮೊಗ್ಗದವನು! ಅವನ ಹೆಸರೇನು?...

‘ಏ ಕತ್ತೆ! ಏಳು. ಮನೆಕೆಲ್ಸ ಮಾಡ್ಲಿಕ್ಕೆ ನಿನ್ನತ್ತೆ ಬರ್ತಾಳಾ? ಏಳು ಮೇಲೆ...’
ಅಮ್ಮನ ಪಾದ ನನ್ನ ಎಡಗೈಯನ್ನು ತಿವಿಯುತ್ತಿತ್ತು. ನೇಹಾ ಮತ್ತು ಶರತ್ ನನ್ನ ಮನಸ್ಸಿನಲ್ಲಿ ಅಡಗಿಕೊಂಡರು. ಅವರಿಬ್ಬರ ಬೆನ್ನ ಹಿಂದೆ ನನ್ನ ರಾಜಕುಮಾರ. ಅವನನ್ನು ಸಂಪರ್ಕಿಸಲೇ? ಹೇಗೆ? ಯಾಕೆ? ನನ್ನ ಭ್ರಾಂತಿಯೊಳಗೆ ಅವನ್ಯಾಕೆ ತೆರೆದುಕೊಂಡ? ಮೊದಲೇ ನನ್ನ ಮನಸ್ಸಿನಲ್ಲಿ ಅವನಿದ್ದನೆ? ಕಳೆದ ವರ್ಷ ಕಾಲೇಜ್ ಡೇ ಸಂದರ್ಭದಲ್ಲಿ ಅವನನ್ನು ನೋಡಿದ್ದೇನೋ ನಿಜ. ಅಲ್ಲಿಗೇ ನಿಂತಿತ್ತು ಅದು. ಮಂಗಳೂರಲ್ಲಿ ಅಲೋಶಿಯಸ್ ಕಾಲೇಜಿನಲ್ಲಿ ಕೆಮಿಸ್ಟ್ರಿ ಲೆಕ್ಚರರ್ ಆತ.

‘ವಸಂತ್’! ಬೆಳಕೊಂದು ಮನದೊಳಗೆ ನುಗ್ಗಿತೆ? ಪಾದಗಳಿಗೆ ಗೆಜ್ಜೆ ಯಾರು ಕಟ್ಟಿದರು? ಖಾಲಿ ಜಡೆಯ ಬುಡದಲ್ಲಿ ಮಲ್ಲಿಗೆಯ ಘಮ ಎಲ್ಲಿಂದ? ಹೊಸಗಾಳಿಯ ಅಲೆಯೇರಿ ಮನೆಗೆಲಸ ಮುಗಿಸಿಕೊಂಡು ಕಾಲೇಜಿಗೆ ಬಂದಾಗ ನೇಹಾ ನನ್ನತ್ತ ನೋಡಿದ ನೋಟಕ್ಕೆ ಏನಾದರೂ ಬೇರೆ ಅರ್ಥವಿದೆಯೆ? ಮಾಮೂಲಿನಂತೆ ಇರುವ ಪ್ರಯತ್ನ ವಿಫಲವಾಗುತ್ತಿತ್ತು. ಶರತ್ ಕಡೆ ಕಣ್ಣು ಹಾಯಿಸಲೂ ಸಾಧ್ಯವಾಗುತ್ತಿಲ್ಲ, ಅವನ ಕಸಿನ್ ನನ್ನೊಳಗೆ ಇರುವುದನ್ನು ಅವನೇ ಕಂಡರೆ?. ನೋಟ್ಸ್ ಕೇಳುತ್ತಾ ನನ್ನೆದುರು ನಿಂತವನಿಗೆ ನನ್ನ ಕೊಡೆ ಕೊಟ್ಟು ನಗೆಗೀಡಾದೆ. ಇವತ್ತು ಶುಕ್ರವಾರ. ಮಧ್ಯಾಹ್ನದ ನಂತ್ರ ನಮಗೆ ಯಾವುದೇ ಕ್ಲಾಸಸ್ ಇಲ್ಲ. ಬೆಳಗಿನ ತರಗತಿಗಳನ್ನು ಮುಗಿಸಿ ನೇಹಾ ಮನೆಗೇ ಹೋಗುವ ಪರಿಪಾಠ. ನಿಟ್ಟುಸಿರು ಬಿಟ್ಟು ಪಾಠಗಳ ಕಡೆ ಗಮನ ಕೊಡಲು ಪ್ರಯತ್ನಿಸಿದೆ. ಒಳಗಿನ ಕಾವು ಉಸಿರುಗಳಲ್ಲಿ ಹೊರಹರಿದು ಕೆನ್ನೆಗಳಿಗೆ ಜ್ವರವೇರುತ್ತಲೇ ಇತ್ತು. ನೇಹಾಳ ಮನೆ ತಲುಪಿದಾಗ ಜಾಜಿ ಮಂಟಪದ ನೆರಳೂ ಉಸಿರ್ಗರೆಯುತ್ತಿತ್ತೆ?

Monday, 22 November 2010

ಸುಮ್ಮನೆ ನೋಡಿದಾಗ...೦೪

ಈ ಬೆಳಗು ನನಗೆ ಎಂದಿನಂತಿಲ್ಲ. ನನ್ನ ಉತ್ಸಾಹಕ್ಕೆ ಕಾರಣ ಹುಡುಕಬೇಕಿರಲಿಲ್ಲ. ಅಮ್ಮನ ವಕ್ರನೋಟ ನನ್ನನ್ನು ತಾಗಲೇ ಇಲ್ಲ. ಕಾಲೇಜಿನ ಕಡೆಗೆ ಕುಣಿಹೆಜ್ಜೆ ಹಾಕಿದೆ. ಪಾದದ ಸುತ್ತ ಇಲ್ಲದ ಗೆಜ್ಜೆಸದ್ದು ಎದೆಯಲ್ಲಿ. ಕಥೆಯ ಹಸ್ತಪ್ರತಿ ಕೈಯಲ್ಲಿ- ಸಸ್ಯಶಾಸ್ತ್ರದ ರೆಕಾರ್ಡ್ ಪುಸ್ತಕದೊಳಗೆ ಅಡಗಿದ್ದ ಹಾಳೆಗಳನ್ನು ಬೇರಾರಿಗೂ ತಿಳಿಯದಂತೆ ನೇಹಾಳ ಕೈಗೆ ಹೇಗೆ ರವಾನಿಸುವುದೆನ್ನುವ ಯೋಜನೆ ಹಾಕುವಷ್ಟರಲ್ಲಿ ಕಾಲೇಜಿನ ಮೆಟ್ಟಲೇರಿದೆ.

ಬೆಳಗಿನ ತರಗತಿಗಳಲ್ಲಿ ನನ್ನ ಗಮನವಿಲ್ಲ. ಜೀವಶಾಸ್ತ್ರದ ಅಧ್ಯಾಪಕರು ಸಮಯ ಮೀರಿ ಪಾಠ ಮಾಡುತ್ತಿದ್ದುದು ವಾಚಿನ ಮೇಲೆ ಸುಮ್ಮನೇ ಬೆರಳಾಡಿಸುತ್ತಿದ್ದ ನನ್ನ ಅರಿವಿಗೆ ಬರಲೇ ಇಲ್ಲ. ನಮ್ಮನ್ನೆಲ್ಲ ತೀಕ್ಷ್ಣವಾಗಿ ನೋಡುತ್ತಾ ಪಾಠ ಮಾಡುವ ಅವರಿಗೆ ಮಾತ್ರ ನನ್ನ ಬೆರಳುಗಳಾಟ ಕಿರಿಕಿರಿಯಾಗಿ, ‘ಹ್ಮ್, ಐ ನೋ! ಐ ನೋ ಮೈ ಟೈಮ್. ಲೆಟ್ ಮಿ ಫ಼ಿನಿಷ್ ದಿಸ್ ಕಾನ್ಸೆಪ್ಟ್ ಮೇಡಮ್!’ ಅಂದರು ಗಂಭೀರವಾಗಿಯೇ. ನನ್ನ ಅದೃಷ್ಟಕ್ಕೆ ಅವರು ಯಾರಿಗಾಗಿ ಈ ಮಾತು ಹೇಳಿದರೆನ್ನುವುದು ಯಾರಿಗೂ ಗೊತ್ತಾಗಲೇ ಇಲ್ಲ. ನನ್ನೊಳಗು ಎಚ್ಚತ್ತುಕೊಂಡಿತು, ಅಷ್ಟೇ.

ಊಟದ ಸಮಯ ಕಥೆ ಬರೆದ ವಿಷಯವನ್ನು ನೇಹಾಳಿಗೆ ಸೂಕ್ಷ್ಮವಾಗಿ ತಿಳಿಸಿದೆ. ಸ್ಫೂರ್ತಿಯಾದ ಸಂದರ್ಭ ಮಾತ್ರ ಸದ್ಯಕ್ಕೆ ನನ್ನಲ್ಲೇ ಇರಲಿ ಅಂದುಕೊಂಡೆ. ಅಪರಾಹ್ನದ ಮೊದಲ ತರಗತಿ ಇರಲಿಲ್ಲವಾದ್ದರಿಂದ ಮೈದಾನದ ಮೂಲೆಯ ಮರದ ನೆರಳಿಗೆ ಸಾಗಿದೆವು. ಕಥೆಯೊಳಗೆ ಇಳಿದುಹೋದವು ಎರಡು ಜೊತೆ ಕಣ್ಣುಗಳು. ಓದಿ ಮುಗಿಸಿದ ನೇಹಾ ಕೆಲವೊಂದು ಸಲಹೆಗಳನ್ನೂ ನೀಡಿದಳು. ಮುಖ್ಯವಾಗಿ ಇದನ್ನು ರಮ್ಯಗಾನದತ್ತ ವಾಲಿಸಬೇಕೆನ್ನುವ ಕೋರಿಕೆಯನ್ನಿತ್ತಳು. ಈಗಿರುವಂತೆ ಸರಳ ನೇರ ಅಣ್ಣ-ತಂಗಿಯ ಸುತ್ತ ಸಾಗುವ ನಿರೂಪಣೆ ನಮ್ಮ ಕಾಲೇಜ್ ವಾರ್ಷಿಕ ಸಂಚಿಕೆಯ ಓದುಗರಿಗೆ ಬೇಕಾಗಿಲ್ಲವೆಂದೂ ರೊಮ್ಯಾಂಟಿಕ್ ಕಥೆಯೇ ಈ ವಯೋಮಾನದ ಉದ್ಯಾನವೆಂದೂ ಬುದ್ಧಿ ಹೇಳಿದಳು. ನಾಜೂಕಾಗಿಯೇ ನಾನೊಬ್ಬ ಮೊದ್ದು ಎಂದಳು. ಇಬ್ಬರೂ ನಕ್ಕೂ ನಕ್ಕೂ ಕಣ್ಣಲ್ಲಿ ನೀರಿಳಿಸಿಕೊಂಡೆವು. ಸಂಜೆಯ ಕ್ಲಾಸುಗಳನ್ನು ಮುಗಿಸಿಕೊಂಡು ಮನೆಗೆ ಬರುತ್ತಾ ಮತ್ತೊಂದಷ್ಟು ಚರ್ಚೆಗಳಾದವು. ಕೊನೆಗೂ ಅವಳಿಗಾಗಿ ಈ ಕಥೆಯನ್ನು ತಿದ್ದಿ ಬರೆಯುವುದಕ್ಕೆ ಒಪ್ಪಿಕೊಂಡು ಮನೆ ಸೇರಿಕೊಂಡೆ.

ಅಮ್ಮನ ಮೂಡ್ ಮತ್ತೆ ಕೆಟ್ಟಿತ್ತು. ನನಗದರ ಬಿಸಿ ತಟ್ಟದಷ್ಟು ನನ್ನ ಹೃದಯ-ಮನಸ್ಸು ಕಥೆಯ ಹೊಸ ಹಂದರದೊಳಗೆ ಹುದುಗಿಹೋಗಿದ್ದವು.