ಇನ್ನೊಂದು ಅಕ್ಷರಂಗಳ

"ಸುಪ್ತದೀಪ್ತಿ"ಯ ಕಿಟಕಿ->->->

Sunday, 5 December 2010

ಸುಮ್ಮನೆ ನೋಡಿದಾಗ...೦೬

ಊಟ ಮುಗಿಸಿ ಕೂತ ಗೆಳತಿಯರ ನಡುವೆ ಅಗಾಧ ಮೌನ. ನನ್ನ ಕೆನ್ನೆಯ ರಂಗಿನಿಂದಲೇ ಇಂದು ಜಾಜಿಮೊಗ್ಗುಗಳು ಇನ್ನಷ್ಟು ಕೆಂಪಾಗಿದ್ದವು. ನೇಹಾ ನನ್ನತ್ತ ಆಗಾಗ ನೋಟ ಹರಿಸಿ ಮತ್ತೆ ಬಳ್ಳಿಯ ನಡುವೆ ಕಾಣುವ ಆಕಾಶ ದಿಟ್ಟಿಸುತ್ತಿದ್ದಳು. ಎಷ್ಟನೆಯ ಬಾರಿಗೋ ಅವಳು ಆಕಾಶ ನೋಡಿದಾಗ ನನಗೆ ನಗುವೇ ಬಂತು, ‘ಏನುಂಟಾ ಅಲ್ಲಿ? ಯಾಕೆ ನೋಡ್ತಿದ್ದೀ?’

‘ಮಳೆ ಬರ್ತದಾ ಅಂತ ಲೆಕ್ಕ ಹಾಕ್ತಿದ್ದೇನೆ’
‘ಯಾಕೆ?’
‘ನಿನ್ನೆದೆಯಲ್ಲಿ ಮೋಡ ಕಟ್ಟಿಕೊಳ್ತಾ ಉಂಟಲ್ಲ. ಅಲ್ಲಿಂದ ಅಥವಾ ಇಲ್ಲಿಂದ ಸುರಿದೀತು. ಎಲ್ಲಿಂದ ಮೊದಲು ಬಂದೀತೂಂತ ನೋಡ್ತಿದ್ದೆ. ಸರಿಯಾಗಿ ಒಂದು ಜಡಿಮಳೆ ಹೊಡೆದ್ರೆ ಒಮ್ಮೆ ತಂಪಾದೀತಲ್ಲ ಅಂತ ಕಾಯ್ತಿದ್ದೇನೆ. ನೀ ಸುರಿಸ್ತೀಯಾ? ಆಕಾಶರಾಯನನ್ನು ಕೇಳ್ಬೇಕಾ?’
‘ಈಗಲೇ ನಿಂಗೆ ತಾಂಪಾಗುವ ಯೋಚನೆಯಾ? ಈಗಿನ್ನೂ ಜನವರಿ’
‘ಜನವರಿಯಲ್ಲೇ ಇಷ್ಟು ಉರೀಲಿಕ್ಕೆ ಶುರುವಾದ್ರೆ ಮೇ ತಿಂಗಳ ಗತಿಯೇನು ಅಂತ!’
‘ಈಗೆಲ್ಲಿಯಾ ಉರಿ? ಎಂತ ಮಾತಾಡ್ತಿ ನೀನು?’
‘ನೀನಂತೂ ಏನೂ ಮಾತಾಡ್ತಾ ಇಲ್ಲ. ನಾನಾದ್ರೂ ಏನಾದ್ರೂ ಹೇಳ್ತೇನೆ; ಕೇಳು ಬೇಕಾದ್ರೆ. ಇಲ್ಲಾಂದ್ರೆ ನಿನ್ನೊಳಗೆ ಮುಳುಗು, ನಂಗೇನು?’
‘ಮುಳುಗಿದ್ದಲ್ಲ ಮಾರಾಯ್ತಿ...’
‘ಮತ್ತೆಂತ? ಕಳೆದುಹೋಗಿದ್ಯಾ?’
‘ಹ್ಮ್!’
‘ನನ್ನ ಗೆಳತಿಯನ್ನು ಈ ರೀತಿ ಹಾರಿಸಿಕೊಂಡು ಹೋದವರು ಯಾರೋ? ಹರ್ಷಣ್ಣ ಅಂತೂ ಅಲ್ಲ. ಮತ್ತೆ?...’
‘ಮತ್ತೆ ಎಂತದೂ ಇಲ್ಲ! ಯಾರೂ ಇಲ್ಲ. ನಾನು ಅದೇ ಕಥೆಯ ಗುಂಗಿನಲ್ಲೇ ಇದ್ದೇನೆ, ಅಷ್ಟೇ...’
‘ಹ್ಮ್, ಅದು ಗೊತ್ತಾಗ್ತದೆ. ಕಥೆಯ ಗುಂಗು ತಲೆಯಿಂದ ಹೃದಯಕ್ಕೆ ಇಳಿದಿದೆ ಅಂತ...’
‘ಎಲ್ಲಿಗೂ ಇಳೀಲಿಲ್ಲಪ್ಪ. ಸುಮ್ನೇ ಏನೇನೋ ಹೇಳ್ಬೇಡ...’
‘ನೀನು ಏನೇನೋ ಕತೆ ನನ್ನ ಹತ್ರ ಹೆಣೀಬೇಡ. ನಿನ್ನನ್ನು ಇವತ್ತಲ್ಲ ನೋಡುದು ನಾನು. ಒಂದನೇ ಕ್ಲಾಸಿಂದಲೂ ಒಟ್ಟಿಗೇ ಓದಿದವ್ರು ನಾವಿಬ್ರೇ ಅನ್ನುದನ್ನು ಮರ್ತಿದ್ಯಾ ಹೇಗೆ?’
‘ಅಮ್ಮಾ, ಮಹಾತಾಯಿ! ನಾನ್ಯಾವುದನ್ನೂ ಮರೀಲಿಲ್ಲಮ್ಮ...’
ಅಷ್ಟರಲ್ಲೇ ನಳಿನಿ ಅಂಟಿ ನಮ್ಮ ಕಡೆಗೇ ಬಂದ್ರು. ನಮ್ಮ ಮಾತಿನ ಮಂಟಪದಲ್ಲಿ ಮುಗುಳುಗಳು ಅರಳಿದವು.

ಆದರೆ, ಅವರ ಮುಖ ಗಂಭೀರವಾಗಿತ್ತು. ಬಂದವರೇ, ‘ನೇಹಾ, ನಮ್ಮೆಲ್ರಿಗೂ ಕಾಫಿ ಮಾಡಿ ತಾ, ಹೋಗು.’ ಎಂದು ನೇಹಾಳನ್ನು ಕಳಿಸಿ ಅವಳ ಸ್ಥಾನದಲ್ಲಿ ನನ್ನ ಬದಿಗೆ ತಾನು ಕೂತರು.
‘ಶಿಶಿರಾ, ನಿನಗೊಂದು ಮುಖ್ಯ ವಿಚಾರ ತಿಳಿಸಬೇಕಿತ್ತು. ತಪ್ಪು ತಿಳೀಬೇಡ ನನ್ನನ್ನು. ಈಗ, ನೀನು ಬರೆದ ಕಥೆ ನೇಹಾನ ಪುಸ್ತಕಗಳ ಒಟ್ಟಿಗೆ ಇದ್ದದ್ದು ನನ್ನ ಕಣ್ಣಿಗೆ ಬಿತ್ತು. ಓದಿದೆ. ತುಂಬಾ ಚೆಂದ ಬರ್ದಿದ್ದೀ. ವಯಸ್ಸಿಗೆ ಸಹಜವಾದ ಭಾವನೆ, ಬರವಣಿಗೆಯ ಹಿಡಿತ, ಎರಡೂ ಚೆನ್ನಾಗುಂಟು. ಆದರೆ, ಇದನ್ನು ನಿನ್ನಮ್ಮ ನೋಡದ ಹಾಗೆ ಜಾಗ್ರತೆ ಮಾಡಮ್ಮ. ನಿನಗಾಗಿ ಈ ಮಾತನ್ನು ಹೇಳ್ತಿದ್ದೇನೆ.’
‘ಥ್ಯಾಂಕ್ಸ್ ಅಂಟಿ, ಕಥೆಯನ್ನು ಮೆಚ್ಚಿಕೊಂಡದ್ದಕ್ಕೆ. ಆದ್ರೆ ಅದು ನನ್ನ ಕಥೆ ಅಂತ ಹೇಗೆ ಗೊತ್ತಾಯ್ತು? ನೇಹಾದ್ದು ಅಂತ ಅನ್ನಿಸ್ಲಿಲ್ವಾ?’
‘ನೇಹಾ ಕಥೆ ಎಲ್ಲಿ ಬರೀತಾಳೆ? ಅದೆಲ್ಲ ಏನಿದ್ರೂ ನಿಂದೇ. ನಿನ್ನನ್ನು ನಾನು ಇವತ್ತು ನೋಡುದಾ?’ (ಇದೇ ಮಾತನ್ನು ಅವಳೂ ಹೇಳಿದ್ದಲ್ವಾ? ಏನಾಗಿದೆ? ಅಂದುಕೊಂಡೆ.)
ಆಂಟಿಯ ಮುಖ ನೋಡಿ ಗಂಭೀರವಾಗಿ ಕೇಳಿದೆ, ‘ಯಾಕೆ ಆಂಟಿ ಅಮ್ಮನಿಗೆ ಗೊತ್ತಾಗಬಾರ್ದು?’
ದೊಡ್ಡದಾಗಿ ಉಸಿರು ಬಿಟ್ಟು ಒಮ್ಮೆ ಆಕಾಶ ನೋಡಿ, ಮತ್ತೆ ಮೆಲ್ಲಗೆ ಆಂಟಿ ಹೇಳಿದ್ರು, ‘ಅದೊಂದು ದೊಡ್ಡ ಕಥೆ. ನಮ್ಮ ಬಾಲ್ಯದ್ದು. ಇನ್ನೊಮ್ಮೆ ಯಾವತ್ತಾದ್ರೂ ಹೇಳ್ತೇನೆ, ಬಿಡು...’
‘ಇಲ್ಲ ಅಂಟಿ, ಇವತ್ತೇ ಹೇಳಿ, ಪ್ಲೀಸ್. ಇವತ್ತು ನಂಗೇನೂ ಕಾಲೇಜ್ ಕೆಲ್ಸ ಇಲ್ಲ. ಅಮ್ಮ ಸಂಜೇವರೆಗೆ ಮನೇಗೆ ಬರುದಿಲ್ಲ ಅಂತ ಬೆಳಗ್ಗೇನೇ ಹೇಳಿ ಹೋಗಿದ್ದಾರೆ. ಮಹಿಳಾ ಸಮಾಜದ ಪಿಕ್‌ನಿಕ್ ಅಂತೆ. ಅಂದ್ರೆ ಇನ್ನು ಬರುದು ಆರು ಆರೂವರೆಯ ಮೇಲೆಯೇ. ನಂಗೆ ಪುರ್ಸೊತ್ತು ಉಂಟು. ಹೇಳಿ ಇವತ್ತೇ..’
ಆಗಲೇ ನೇಹಾ ಮೂರು ಲೋಟ ಕಾಫಿ ತಗೆದುಕೊಂಡು ಬಂದಳು. ಅವಳು ಇರಬೇಕೋ ಬೇಡವೋ ಅನ್ನುವ ಹಾಗೆ ಅವಳನ್ನೇ ಎರಡು ಕ್ಷಣ ದಿಟ್ಟಿಸಿದ ಆಂಟಿ ಪುನಃ ನಮ್ಮಿಬ್ಬರನ್ನೂ ನೋಡಿ ನೇಹಾಳನ್ನು ಅವರ ಇನ್ನೊಂದು ಬದಿಗೆ ಕುಳಿತುಕೊಳ್ಳಲು ಹೇಳಿದರು. ಕಾಫಿ ಹೀರುತ್ತಾ ಯೋಚನೆಯೊಳಗೆ ಮುಳುಗಿಹೋದರು. ಲೋಟದಿಂದೇಳುತ್ತಿದ್ದ ಹೊಗೆ ಮರೆಯಾದಾಗ ಅವರ ಒಳಗಿಂದಲೇ ಹೊಗೆ ಬರುತ್ತಿರುವ ರೀತಿಯಲ್ಲಿ ನಿಟ್ಟುಸಿರು ಹೊರಬಿತ್ತು.
‘ಶಿಶಿರಾ. ಈ ಕಥೆ ನಿಮಗಿಬ್ಬರಿಗೂ ನೋವು ಕೊಡಬಹುದು. ಮೂವತ್ತು ವರ್ಷ ಹಳೇ ಕಥೆ ಇದು. ಆದರೂ ಇದನ್ನು ತಿಳಿಯುವ ಅರ್ಹತೆ ನಿಮಗಿಬ್ಬರಿಗೂ ಉಂಟೂಂತ ನಾನಿದನ್ನು ಹೇಳ್ತೇನೆ. ನಿಮ್ಮನ್ನು ನೀವು ಸಂಭಾಳಿಸಿಕೊಳ್ಳುವ ಶಕ್ತಿ ನಿಮಗುಂಟು. ನಿಮ್ಮೊಟ್ಟಿಗೆ ನಾನಿದ್ದೇನೆ. ಕಥೆ ಕೇಳಿ ನಿನ್ನ ಅಮ್ಮನ ಮೇಲೆ, ನನ್ನ ಮೇಲೆ ಕೋಪಿಸಿಕೊಳ್ಳುವ ಹಕ್ಕೂ ನಿಮಗುಂಟು. ಕೋಪ ಬಂದ್ರೆ ಅದನ್ನು ಅದುಮಿಟ್ಟುಕೊಳ್ಳದೆ, ಹೇಗೆ ಹೊರಗೆ ಹಾಕ್ತೀರಿ ಅನ್ನುದು ಮಾತ್ರ ಬುದ್ಧಿವಂತಿಕೆಯ ವಿಷಯ, ನೆನಪಿರ್ಲಿ. ಆಯ್ತಾ...?’

ಆಂಟಿಯನ್ನು ದಾಟಿ ನಮ್ಮಿಬ್ಬರ ಗೊಂದಲಮಯ ಕಣ್ಣುಗಳು ಸಂಧಿಸಿದವು.

Monday, 29 November 2010

ಸುಮ್ಮನೆ ನೋಡಿದಾಗ...೦೫

ಮರುದಿನ ಹೊಸ ಕಥೆಯನ್ನು ನೇಹಾಳ ಕೈಗೆ ರವಾನಿಸಿದೆ. ಮಧ್ಯಾಹ್ನದ ಊಟ ಮುಗಿಸಿ ಮೈದಾನದ ಮರದಡಿಗೆ ಸಾಗಿದೆವು. ಹೊಸ ಕಥೆಯ ಓದುವಿಕೆಯಲ್ಲಿ ಅಲ್ಲಿನ ಅಳಿಲು ಮತ್ತು ಗುಬ್ಬಚ್ಚಿಗಳೂ ಭಾಗಿಯಾದವು. ಎಲ್ಲೋ ಕಳೆದುಹೋಗಿದ್ದ ಎರಡು ಮನಸ್ಸುಗಳನ್ನು ಅಳಿಲು ಕಿಚಕಿಚ ಕಿರುಚಾಡಿ ಎಚ್ಚರಿಸಿತು. ಮೈದಾನದಲ್ಲಿ ಕ್ರಿಕೆಟ್ ಆಡಲು ಹುಡುಗರ ಗುಂಪು ಬರುತ್ತಿತ್ತು. ಕ್ಲಾಸುಗಳೆಲ್ಲ ಮುಗಿದೇಹೋಗಿದ್ದವು. ಸಂಜೆ ಐದಾಗಿತ್ತು. ಮೊತ್ತ ಮೊದಲ ಬಾರಿಗೆ ನಾವಿಬ್ಬರೂ ತರಗತಿಗಳಿಗೆ ಚಕ್ಕರ್ ಹಾಕಿದ್ದೆವು.

ನೇಹಾ ಕಿಚಾಯಿಸಿದಳು: ‘ನೋಡಿದ್ಯಾ ರೊಮ್ಯಾಂಟಿಕ್ ಲಹರಿ ಹೇಗಿರ್ತದೇಂತ? ಈವರೆಗೂ ಕ್ಲಾಸ್ ತಪ್ಪಿಸದ ನಾವಿಬ್ರೂ ಅದ್ರ ಹೊನಲಲ್ಲಿ ಮುಳುಗಿಹೋಗಿದ್ದೆವು ಅಂದ್ರೆ ಇನ್ನು ಅದೇ ಗುಂಗಿನಲ್ಲಿ ಹಾರಾಡುವವರ ಗತಿಯೇನು? ಗೊತ್ತಾಯ್ತಾ? ಅದ್ಕೇ ಹೇಳಿದ್ದು ರೊಮ್ಯಾಂಟಿಕ್ ಬರೀ ಅಂತ...’ ಸುಮ್ಮನೇ ಕೋಲೇಬಸವನ ಹಾಗೆ ತಲೆಹಾಕಿ ಹೆಜ್ಜೆ ಹಾಕಿದೆ. ನಿಜವಾಗಿಯೂ ನನ್ನ ಒಂದು ಭಾಗವನ್ನು ನಾನು ಕಥೆಯೊಳಗೆ ಕಳೆದುಕೊಂಡಿದ್ದೆ. ಇದನ್ನು ಬರೆದವಳು ನಾನೇನಾ? ನಂಬಿಕೆಯಿರಲೇ ಇಲ್ಲ.

ಯಾವುದೋ ಭ್ರಮಾಲೋಕದಲ್ಲಿ ತೇಲುತ್ತಾ ಮನೆಹೊಕ್ಕಿದವಳಿಗೆ ಮಾಮೂಲು ಸ್ವಾಗತ ಕಾದಿತ್ತು.
‘ಯಾಕಿಷ್ಟು ತಡ? ಎಲ್ಲಿ ಅಲೆದಾಡ್ತಿದ್ದಿ ಇಷ್ಟೊತ್ತು ಬೀದಿ ಬಸವಿ ಥರಾ? ನಿಂಗೇನು ಹೇಳುವವ್ರು ಕೇಳುವವ್ರು ಯಾರೂ ಇಲ್ವಾ? ಮರ್ಯಾದೆಯಿಂದ ಕಾಲೇಜ್ ಬಿಟ್ಟ ಕೂಡ್ಲೇ ಮನೆಗೆ ಬರಬಾರ್ದಾ? ರಸ್ತೆ ಗಸ್ತು ಹೊಡೀಲಿಕ್ಕೆ ಯಾರ್ ಹೇಳಿದ್ರು?...’
ಮುಂದುವರೀತಾ ಇತ್ತು ನಿರರ್ಗಳ ‘ಬೌಗುಳ’. ಅಮ್ಮನಿಗೆ ಹೀಗೆಲ್ಲ ಹೇಳಬಾರದು ಅನ್ನುವ ವಿವೇಚನೆ ಇದ್ದರೂ ಕೆಲವಾರು ವರ್ಷಗಳಿಂದ ಅವರ ಅವ್ಯಾಹತ ಬೌಬೌಬೈಗಳನ್ನು ಕೇಳೀಕೇಳೀ ರೋಸಿಹೋಗಿತ್ತು ಮನಸ್ಸು. ಅದ್ಕೇ ನನ್ನೊಳಗಿನ ಸ್ವತಂತ್ರ ಸ್ವಂತಿಕೆ ಕಥೆಯೊಳಗೆ ಬಿಚ್ಚಿಕೊಂಡಿತ್ತೆನ್ನುವುದು ಹೊಳೆಯಿತು. ‘ಅದಕ್ಕಾಗಿಯಾದರೂ ಅಮ್ಮನಿಗೆ ಥ್ಯಾಂಕ್ಸ್ ಹೇಳ್ಬೇಕು ನೀನು’ ಅಂತ ನೇಹಾ ಹೇಳಬಹುದು ಎನ್ನುವ ಊಹೆಯಿಂದ ನಗುವೇ ಬಂತು. ಬಚ್ಚಲುಮನೆಯಲ್ಲಿ ಕೈಕಾಲು ತೊಳೆಯುತ್ತಿದ್ದ ಕಾರಣ ನನ್ನ ನಗು ಅಮ್ಮನಿಗೆ ಕಾಣಲಿಲ್ಲ. ಇನ್ನೊಂದು ಅವಾಂತರಕ್ಕೆ ಅವಕಾಶವಾಗಲಿಲ್ಲ.

ರಾತ್ರೆಯೆಲ್ಲ ಮತ್ತೆ ಅದೇ ಕನಸು. ಕಥಾನಾಯಕಿಯೇ ನಾನಾದಂತೆ... ಹರ್ಷಣ್ಣ ನನಗಾಗಿ ಗುಲಾಬಿ ರಂಗಿನ ಚಿತ್ತಾರವುಳ್ಳ ಬಿಳೀ ಸಲ್ವಾರ್ ಬಾಂಬೇಯಿಂದ ತಂದಂತೆ... ಅದನ್ನು ಧರಿಸಿ ನಾನು ಮೋಡಗಳಲ್ಲಿ ತೇಲುತ್ತಾ ಸುಂದರ ರಾಜಕುಮಾರನೊಬ್ಬನನ್ನು ಭೇಟಿಯಾದಂತೆ... ಅರೇ... ಅವನು ನನ್ನ ಕ್ಲಾಸ್‍ಮೇಟ್ ಶರತ್‍ನ ಕಸಿನ್ ಅಲ್ವಾ? ಶಿವಮೊಗ್ಗದವನು! ಅವನ ಹೆಸರೇನು?...

‘ಏ ಕತ್ತೆ! ಏಳು. ಮನೆಕೆಲ್ಸ ಮಾಡ್ಲಿಕ್ಕೆ ನಿನ್ನತ್ತೆ ಬರ್ತಾಳಾ? ಏಳು ಮೇಲೆ...’
ಅಮ್ಮನ ಪಾದ ನನ್ನ ಎಡಗೈಯನ್ನು ತಿವಿಯುತ್ತಿತ್ತು. ನೇಹಾ ಮತ್ತು ಶರತ್ ನನ್ನ ಮನಸ್ಸಿನಲ್ಲಿ ಅಡಗಿಕೊಂಡರು. ಅವರಿಬ್ಬರ ಬೆನ್ನ ಹಿಂದೆ ನನ್ನ ರಾಜಕುಮಾರ. ಅವನನ್ನು ಸಂಪರ್ಕಿಸಲೇ? ಹೇಗೆ? ಯಾಕೆ? ನನ್ನ ಭ್ರಾಂತಿಯೊಳಗೆ ಅವನ್ಯಾಕೆ ತೆರೆದುಕೊಂಡ? ಮೊದಲೇ ನನ್ನ ಮನಸ್ಸಿನಲ್ಲಿ ಅವನಿದ್ದನೆ? ಕಳೆದ ವರ್ಷ ಕಾಲೇಜ್ ಡೇ ಸಂದರ್ಭದಲ್ಲಿ ಅವನನ್ನು ನೋಡಿದ್ದೇನೋ ನಿಜ. ಅಲ್ಲಿಗೇ ನಿಂತಿತ್ತು ಅದು. ಮಂಗಳೂರಲ್ಲಿ ಅಲೋಶಿಯಸ್ ಕಾಲೇಜಿನಲ್ಲಿ ಕೆಮಿಸ್ಟ್ರಿ ಲೆಕ್ಚರರ್ ಆತ.

‘ವಸಂತ್’! ಬೆಳಕೊಂದು ಮನದೊಳಗೆ ನುಗ್ಗಿತೆ? ಪಾದಗಳಿಗೆ ಗೆಜ್ಜೆ ಯಾರು ಕಟ್ಟಿದರು? ಖಾಲಿ ಜಡೆಯ ಬುಡದಲ್ಲಿ ಮಲ್ಲಿಗೆಯ ಘಮ ಎಲ್ಲಿಂದ? ಹೊಸಗಾಳಿಯ ಅಲೆಯೇರಿ ಮನೆಗೆಲಸ ಮುಗಿಸಿಕೊಂಡು ಕಾಲೇಜಿಗೆ ಬಂದಾಗ ನೇಹಾ ನನ್ನತ್ತ ನೋಡಿದ ನೋಟಕ್ಕೆ ಏನಾದರೂ ಬೇರೆ ಅರ್ಥವಿದೆಯೆ? ಮಾಮೂಲಿನಂತೆ ಇರುವ ಪ್ರಯತ್ನ ವಿಫಲವಾಗುತ್ತಿತ್ತು. ಶರತ್ ಕಡೆ ಕಣ್ಣು ಹಾಯಿಸಲೂ ಸಾಧ್ಯವಾಗುತ್ತಿಲ್ಲ, ಅವನ ಕಸಿನ್ ನನ್ನೊಳಗೆ ಇರುವುದನ್ನು ಅವನೇ ಕಂಡರೆ?. ನೋಟ್ಸ್ ಕೇಳುತ್ತಾ ನನ್ನೆದುರು ನಿಂತವನಿಗೆ ನನ್ನ ಕೊಡೆ ಕೊಟ್ಟು ನಗೆಗೀಡಾದೆ. ಇವತ್ತು ಶುಕ್ರವಾರ. ಮಧ್ಯಾಹ್ನದ ನಂತ್ರ ನಮಗೆ ಯಾವುದೇ ಕ್ಲಾಸಸ್ ಇಲ್ಲ. ಬೆಳಗಿನ ತರಗತಿಗಳನ್ನು ಮುಗಿಸಿ ನೇಹಾ ಮನೆಗೇ ಹೋಗುವ ಪರಿಪಾಠ. ನಿಟ್ಟುಸಿರು ಬಿಟ್ಟು ಪಾಠಗಳ ಕಡೆ ಗಮನ ಕೊಡಲು ಪ್ರಯತ್ನಿಸಿದೆ. ಒಳಗಿನ ಕಾವು ಉಸಿರುಗಳಲ್ಲಿ ಹೊರಹರಿದು ಕೆನ್ನೆಗಳಿಗೆ ಜ್ವರವೇರುತ್ತಲೇ ಇತ್ತು. ನೇಹಾಳ ಮನೆ ತಲುಪಿದಾಗ ಜಾಜಿ ಮಂಟಪದ ನೆರಳೂ ಉಸಿರ್ಗರೆಯುತ್ತಿತ್ತೆ?